ಉದಯವಾಹಿನಿ, ಚಿಕ್ಕಬಳ್ಳಾಪುರ: ಹೊಸ ವರ್ಷಾಚರಣೆಗೆ ಕೌಂಟ್ ಡೌನ್ ಶುರುವಾಗಿದ್ದು, ಎಲ್ಲೆಲ್ಲೂ ಸಂಭ್ರಮಾಚರಣೆಗೆ ಸಕಲ ಸಿದ್ಧತೆ ಕೈಗೊಳ್ಳಲಾಗ್ತಿದೆ. ಆದ್ರೆ ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವವಿಖ್ಯಾತ ನಂದಿ ಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಜಿಲ್ಲಾಡಳಿತ ಬ್ರೇಕ್ ಹಾಕಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಅಹಿತಕರ ಘಟನೆಗಳು ನಡೆದಂತೆ ಎಚ್ಚರಿಕೆ ವಹಿಸುವ ಸಲುವಾಗಿ ನಂದಿ ಗಿರಿಧಾಮಕ್ಕೆ ಡಿಸೆಂಬರ್ 31 ರಂದು ಮಧ್ಯಾಹ್ನ 2 ಗಂಟೆಯಿಂದ ಹಾಗೂ ಹೊಸ ವರ್ಷ ಜನವರಿ 1 ರ ಬೆಳಗ್ಗೆ 10 ಗಂಟೆಯವರೆಗೂ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಆದೇಶ ಹೊರಡಿಸಿದ್ದಾರೆ. ಆದ್ರೆ ನಂದಿ ಬೆಟ್ಟದ ಮೇಲ್ಭಾಗದ ಹೋಟೆಲ್ ಗಳಲ್ಲಿ ಮುಂಗಡವಾಗಿ ರೂಮ್ ಬುಕ್ ಮಾಡಿರುವ ಪ್ರವಾಸಿಗರಿಗೆ ವಿನಾಯತಿ ನೀಡಲಾಗಿದೆ.
