ಉದಯವಾಹಿನಿ, ಶಿವಮೊಗ್ಗ: ಹೊಸನಗರ ತಾಲೂಕಿನ ಹುಲಿಕಲ್ ಘಾಟಿ ಮಾರ್ಗದಲ್ಲಿ ಖಾಸಗಿ ಬಸ್ ಅಪಘಾತ ಸಂಭವಿಸಿ ಮಗುವೊಂದು ಮೃತಪಟ್ಟಿದ್ದು, ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ದಾವಣಗೆರೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಹುಲಿಕಲ್ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬಸ್ನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ. ಅಪಘಾತದಲ್ಲಿ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದು, ಶರೀಫಾ ಬಿ (57), ಇಮಾಮ್ ಸಾಬ್ (73) ಹಾಗೂ ಸಫಾನ (28) ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ತಕ್ಷಣವೇ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಮಾಹಿತಿ ದೊರಕುತ್ತಿದ್ದಂತೆಯೇ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
