ಉದಯವಾಹಿನಿ, ಮುಂಬೈ: ಪುಣೆ ಸರಣಿ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಅಸ್ಲಾಂ ಶಬ್ಬೀರ್ ಶೇಖ್ ಅಲಿಯಾಸ್ ಬಂಟಿ ಜಹಗೀರ್ದಾರ್ನನ್ನು (52) ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯ ಶ್ರೀರಾಮಪುರದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.ಶ್ರೀರಾಮಪುರದ ನಿವಾಸಿ ಜಹಗೀರ್ದಾರ್ ಬುಧವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಬೊರಾವಕೆ ಕಾಲೇಜು ರಸ್ತೆಯಲ್ಲಿರುವ ಸ್ಮಶಾನದಿಂದ ಮರಳುತ್ತಿದ್ದಾಗ ಬೈಕಿನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಗುಂಡೇಟಿನಿಂದ ಗಂಭೀರ ಗಾಯಗೊಂಡಿದ್ದ ಜಹಗೀರ್ದಾರ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.
ಅಹಲ್ಯಾನಗರದ ಪೊಲೀಸ್ ವರಿಷ್ಠಾಧಿಕಾರಿ ಸೋಮನಾಥ್ ಘರ್ಗೆ ಪ್ರತಿಕ್ರಿಯಿಸಿ, ದಾಳಿಕೋರರ ಗುರುತು ಪತ್ತೆಯಾಗಿಲ್ಲ. ಪ್ರಾಥಮಿಕವಾಗಿ ಇಬ್ಬರು ವ್ಯಕ್ತಿಗಳು ಗುಂಡು ಹಾರಿಸಿದ್ದಾರೆಂದು ಶಂಕಿಸಲಾಗಿದೆ. ಕೊಲೆಯ ಹಿಂದಿನ ಉದ್ದೇಶವನ್ನು ದೃಢಪಡಿಸುವ ಪ್ರಯತ್ನಗಳು ನಡೆಯುತ್ತಿವೆ. ಅಪರಾಧದಲ್ಲಿ ಹೆಚ್ಚಿನ ವ್ಯಕ್ತಿಗಳು ಭಾಗಿಯಾಗಿದ್ದಾರೆಯೇ ಎಂಬುದರ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಪೊಲೀಸರ ಪ್ರಕಾರ ಜಹಗೀರ್ದಾರ್ ಕುಖ್ಯಾತ ಅಪರಾಧಿಯಾಗಿದ್ದು ಅಕ್ರಮ ಮರಳು ವ್ಯವಹಾರ, ಸುಲಿಗೆ, ಕೊಲೆ ಮತ್ತು ಭಯೋತ್ಪಾದನೆಗೆ ಸಂಬಂಧಿಸಿದಂತೆ 18 ಕೇಸ್ಗಳು ದಾಖಲಾಗಿವೆ. ಆತನನ್ನು ಪೊಲೀಸರು ಜಿಲ್ಲೆಯಿಂದಲೇ ಗಡಿಪಾರು ಮಾಡಿದ್ದರು. ಪುಣೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ಹೊರತಾಗಿಯೂ ಸೇನಾ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಅಡಿ 2006 ರಲ್ಲಿ ನಾಸಿಕ್ನಲ್ಲಿ ಜಹಗೀರ್ದಾರ್ನನ್ನು ರಹಸ್ಯ ಕಾಯ್ದೆಯಡಿಯಲ್ಲಿ ಬಂಧಿಸಲಾಗಿತ್ತು.
