ಉದಯವಾಹಿನಿ ಹಾವೇರಿ: ಸಿಎಂ ಸಿದ್ದರಾಮಯ್ಯ ಅವರು ನಾಳೆ (ಜ.7) ಹಾವೇರಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಈ ವೇಳೆ ಸಿಎಂ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ನೂತನ ಮೆಡಿಕಲ್ ಕಾಲೇಜು ಹಾಗೂ ಐಬಿ ಉದ್ಘಾಟನೆ ಮಾಡಲಿದ್ದಾರೆ.
ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಮಾಹಿತಿ ನೀಡಿದ್ದಾರೆ. ಜಿಲ್ಲಾ ಪ್ರವಾಸದ ವೇಳೆ ಸಿಎಂ, ಡಿಸಿಎಂ ಹಾವೇರಿಯ ಹುಕ್ಕೇರಿ ಮಠಕ್ಕೆ ಭೇಟಿ ನೀಡಿ, ಸದಾಶಿವ ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ. ಹಾವೇರಿಯಲ್ಲಿ ಮೆಡಿಕಲ್ ಕಾಲೇಜು ಆದಷ್ಟು ಬೇಗ ಉದ್ಘಾಟನೆ ಮಾಡಬೇಕೆಂಬ ಉದ್ದೇಶವಿತ್ತು. ಲೋಕಸಭೆ ಚುನಾವಣೆಗೆ ಮುಂಚೆ ಕಟ್ಟಡ ಉದ್ಘಾಟನೆ ಮಾಡಬೇಕೆಂಬ ಇಚ್ಛೆಯಿತ್ತು. ಆದರೆ ಕೇಂದ್ರದವರು ಬರುತ್ತಾರೆ ಎಂದು ಉದ್ಘಾಟನೆ ಸ್ವಲ್ಪ ತಡವಾಯಿತು. ಕೇಂದ್ರ ನಾಯಕರನ್ನು ಕರೆದುಕೊಂಡು ಬರುವ ಜವಾಬ್ದಾರಿ ಬೊಮ್ಮಾಯಿ ಅವರು ತೆಗೆದುಕೊಂಡಿದ್ದರು ಎಂದು ತಿಳಿಸಿದ್ದಾರೆ.
ಇನ್ನೂ ಈ ಮೆಡಿಕಲ್ ಕಾಲೇಜಿನಿಂದ ದಾವಣಗೆರೆ, ಹುಬ್ಬಳ್ಳಿಗೆ ಚಿಕಿತ್ಸೆಗೆ ಹೋಗುವುದು ತಪ್ಪುತ್ತದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆಗಳು. ಅವರ ಅಧಿಕಾರದ ಅವಧಿಯಲ್ಲಿ ಮೆಡಿಕಲ್ ಕಾಲೇಜು ಉದ್ಘಾಟನೆ ಮಾಡುತ್ತಿರುವುದು ಇದೇ ಮೊದಲು. ನಾನು ಉಸ್ತುವಾರಿ ಆಗಿರುವ ಜಿಲ್ಲೆಗೆ ಪ್ರತಿಷ್ಠಿತ ಮೆಡಿಕಲ್ ಕಾಲೇಜು ಉದ್ಘಾಟನೆಗೆ ಬರುತ್ತಿರುವುದು ಹೆಮ್ಮೆ ಎಂದು ತಿಳಿಸಿದ್ದಾರೆ.
