ಉದಯವಾಹಿನಿ , ಬೆಂಗಳೂರು: ರಾಜಕೀಯದಲ್ಲಿ ಕುಮಾರಸ್ವಾಮಿ ಅವರಿಗಿಂತ ಹೆಚ್ಚಿನ ಅನುಭವ ಇದೆ. ನಾನು ಸಿಎಂ ಆಗದೇ ಇರಬಹುದು. ಆದರೆ ಆಡಳಿತ ವಿಚಾರದಲ್ಲಿ ಅವರಿಗಿಂತ ಅನುಭವ ಹೊಂದಿದ್ದೇನೆ. ಅವರಿಂದ ಕಲಿಯುವ ಅಗತ್ಯ ನನಗಿಲ್ಲ ಎಂದು ಡಿಸಿಎಂ ಡಿಕೆಶಿ ತಿರುಗೇಟು ನೀಡಿದರು.
ಕೆಪಿಸಿಸಿ ಕಚೇರಿಯಲ್ಲಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡ ಗೋವಿಂದರಾಜ್ ಅವರ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಇದೇ ವೇಳೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಜೊತೆ ನಡೆಸಿದ ಸಭೆಗೆ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿರುವ ಬಗ್ಗೆ ಮಾತನಾಡಿದ್ರು. ನಾನು ಬಹಳ ಕಾಲ ಸಚಿವನಾಗಿ ಕೆಲಸ ಮಾಡಿದ್ದೇನೆ. ಆಡಳಿತ ಹೇಗೆ ಮಾಡಬೇಕು? ಯಾರ ಜೊತೆ ಸಭೆ ಮಾಡಬೇಕು? ಮಾಡಬಾರದು ಎಂಬುದು ನನಗೆ ಚೆನ್ನಾಗಿ ಗೊತ್ತಿದೆ ಎಂದು ಕುಟುಕಿದರು.
ಜೆಡಿಎಸ್, ಬಿಜೆಪಿ ಜೊತೆ ವಿಲೀನ ಸಾಧ್ಯತೆ: ಕುಮಾರಸ್ವಾಮಿ ಅವರ ಧೋರಣೆ ನೋಡುತ್ತಿದ್ದರೆ, ಸದ್ಯದಲ್ಲೇ ಜೆಡಿಎಸ್ ಪಕ್ಷ ಬಿಜೆಪಿ ಜೊತೆ ವಿಲೀನವಾಗುವ ಸಾಧ್ಯತೆ ಇದೆ. ವಿಲೀನವಾದರೆ ನಮಗೂ ಒಳ್ಳೆಯದೇ. ನಾವೂ ನೇರವಾಗಿ ಬಿಜೆಪಿ ಜೊತೆ ಹೋರಾಟ ಮಾಡಬಹುದು. ಆಗ ಆಟಕ್ಕೆ ಮೂರು ಪಕ್ಷ, ಲೆಕ್ಕಕ್ಕೆ ಮಾತ್ರ 2 ಪಕ್ಷ ಎಂಬ ಗೊಂದಲ ಇರುವುದಿಲ್ಲ ಎಂದು ವ್ಯಂಗ್ಯವಾಡಿದರು.
