ಉದಯವಾಹಿನಿ, ನವದೆಹಲಿ : ಆಪರೇಷನ್ ಸಿಂದೂರ್ ಕಾರ್ಯಾಚರಣೆ ವಿಚಾರದಲ್ಲಿ ಕಾಂಗ್ರೆಸ್ ಹೊಂದಿರುವ ನಿಲುವಿನ ಬಗ್ಗೆ ಭಾರತೀಯ ಜನತಾ ಪಕ್ಷ ವಾಗ್ದಾಳಿ ನಡೆಸಿದೆ. ಕಾರ್ಯಾಚರಣೆಯ ನಂತರ ಉಂಟಾದ ಉದ್ವಿಗ್ನತೆಯನ್ನು ಶಮನಗೊಳಿಸಲು ಪಾಕಿಸ್ತಾನದ ಜತೆಗೆ ಮಾತುಕತೆ ನಡೆಸಬೇಕು ಎಂದು ಸಲಹೆ ನೀಡಿರುವ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಮಣಿಶಂಕರ್ ಅಯ್ಯರ್ ಅವರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಈ ವಿವಾದ ಆರಂಭವಾಗಿದೆ.

ವಿಡಿಯೊದಲ್ಲಿ ಮಣಿಶಂಕರ್ ಅಯ್ಯರ್ ಆಪರೇಷನ್ ಸಿಂದೂರ್‌ ನಂತರ ಭಾರತ ಪಾಕಿಸ್ತಾನದೊಂದಿಗೆ ಮಾತುಕತೆಯತ್ತ ಗಮನ ಹರಿಸಬೇಕಿತ್ತು ಎಂದು ಹೇಳಿದ್ದಾರೆ. ಅವರ ಹೇಳಿಕೆಗಳಿಗೆ ಬಿಜೆಪಿಯಿಂದ ತೀವ್ರ ಟೀಕೆ ವ್ಯಕ್ತವಾಗಿದ್ದು, ಕಾಂಗ್ರೆಸ್ ಪಾಕಿಸ್ತಾನದ ಬಗ್ಗೆ ಪದೇ ಪದೆ ಮೃದು ಧೋರಣೆ ತಳೆಯುತ್ತಿದೆ ಎಂದು ಆರೋಪಿಸಿದೆ. ಈ ವಿಡಿಯೊಗೆ ಪ್ರತಿಕ್ರಿಯಿಸಿದ ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಕಾಂಗ್ರೆಸ್ ಪಾಕಿಸ್ತಾನದ ಪರವಾಗಿ ನಿಂತಿದೆ ಎಂದು ಆರೋಪಿಸಿದರು. ಅಲ್ಲದೆ ಪಕ್ಷವು ಭಯೋತ್ಪಾದನೆಯ ಬಗ್ಗೆ ಭಾರತದ ನಿಲುವನ್ನು ನಿರಂತರವಾಗಿ ದುರ್ಬಲಗೊಳಿಸುತ್ತದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಯಾವಾಗಲೂ ಪಾಕಿಸ್ತಾನಕ್ಕೆ ಕ್ಲೀನ್ ಚಿಟ್ ನೀಡುತ್ತದೆ ಮತ್ತು ಭಯೋತ್ಪಾದನೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬೆಂಬಲಿಸುವುದಿಲ್ಲ ಎಂದು ಪೂನಾವಾಲಾ ಆರೋಪಿಸಿದರು. ಅದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಲ್ಲ, ಬದಲಾಗಿ ಇಸ್ಲಾಮಾಬಾದ್ ರಾಷ್ಟ್ರೀಯ ಕಾಂಗ್ರೆಸ್ ಎಂದು ವ್ಯಂಗ್ಯವಾಡಿದರು. ಹಾಗೂ ರಾಷ್ಟ್ರೀಯ ಭದ್ರತೆಗೆ ಕಾಂಗ್ರೆಸ್‌ನ ಬದ್ಧತೆಯನ್ನು ಅವರು ಪ್ರಶ್ನಿಸಿದರು.

Leave a Reply

Your email address will not be published. Required fields are marked *

error: Content is protected !!