ಉದಯವಾಹಿನಿ,: ರಾಜ್ಕೋಟ್: ನ್ಯೂಜಿಲೆಂಡ್ ವಿರುದ್ಧ ಮೊದಲನೇ ಏಕದಿನ ಪಂದ್ಯದಲ್ಲಿ 4 ವಿಕೆಟ್ ಗೆಲುವು ಪಡೆದ ಬಳಿಕ ಭಾರತ ತಂಡ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆಯನ್ನು ಪಡೆದಿದೆ. ಇದೀಗ ಜನವರಿ 14 ರಂದು ನಿರಂಜನ್ ಶಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯಕ್ಕೆ ಭಾರತ ತಂಡ ಸಜ್ಜಾಗುತ್ತಿದೆ. ವಡೋದರರ ಬಿಸಿಐ ಕ್ರೀಡಾಂಗಣದಲ್ಲಿ ನಡೆದಿದ್ದ ಮೊದಲನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಕಿವೀಸ್ ತಂಡ, ತನ್ನ ಪಾಲಿನ 50 ಓವರ್ಗಳಿಗೆ 300 ರನ್ಗಳನ್ನು ಕಲೆ ಹಾಕಿತ್ತು. ಬಳಿಕ 301 ರನ್ಗಳ ಗುರಿಯನ್ನು ಹಿಂಬಾಲಿಸಿದ ಭಾರತ ತಂಡ, ಶುಭಮನ್ ಗಿಲ್ ಹಾಗೂ ವಿರಾಟ್ ಕೊಹ್ಲಿ ಅರ್ಧಶತಕಗಳ ಬಲದಿಂದ 49 ಓವರ್ಗಳಿಗೆ 6 ವಿಕೆಟ್ ನಷ್ಟಕ್ಕೆ 306 ರನ್ ಗಳಿಸಿದ ಗೆಲುವಿನ ದಡ ಸೇರಿತು.
ವಡೋದರದಲ್ಲಿ ಸ್ಪಿನ್ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಅವರು ಗಾಯಕ್ಕೆ ತುತ್ತಾಗಿದ್ದರು. ಹಾಗಾಗಿ ರಾಜ್ಕೋಟ್ನಲ್ಲಿ ನಡೆಯಲಿರುವ ಎರಡನೇ ಪಂದ್ಯಕ್ಕೆ ವಾಷಿಂಗ್ಟನ್ ಸುಂದರ್ ಆಡುವುದು ಅನುಮಾನವಾಗಿದೆ. ಮೊದಲನೇ ಪಂದ್ಯದಲ್ಲಿ ಭಾರತ ತಂಡದ ಪ್ಲೇಯಿಂಗ್ XIನಲ್ಲಿ ಆರು ಮಂದಿ ಬೌಲರ್ಗಳು ಆಡಿದ್ದರು. ಇದೀಗ ಎರಡನೇ ಪಂದ್ಯದಲ್ಲಿ ವಾಷಿಂಗ್ಟನ್ ಸುಂದರ್ ಅವರ ಸ್ಥಾನಕ್ಕೆ ಆಲ್ರೌಂಡರ್ ಅಥವಾ ಬೌಲರ್ ಅನ್ನು ಪರಿಗಣಿಸಬಹುದು. ಇದರ ಜೊತೆಗೆ ವಾಷಿಂಗ್ಟನ್ ಸ್ಥಾನಕ್ಕೆ ಧ್ರುವ್ ಜುರೆಲ್ಗೆ ಅವಕಾಶ ನೀಡಿದರೂ ಅಚ್ಚರಿ ಪಡಬೇಕಿಲ್ಲ. ರಾಜ್ಕೋಟ್ ಪಿಚ್ ಪ್ಲ್ಯಾಟ್ ಆಗಿದ್ದು, ಧ್ರುವ್ ಜುರೆಲ್ ಅವರಿಂದ ಭಾರತದ ಬ್ಯಾಟಿಂಗ್ ಡೆಪ್ತ್ ಹೆಚ್ಚಾಗಲಿದೆ.
