ಉದಯವಾಹಿನಿ, ಮಣಿಪುರ: ತಂಗ್ಖುಲ್ ನಾಗಾ ಸಮುದಾಯದ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿದ ಬಳಿಕ ಮಣಿಪುರದಲ್ಲಿ ಮತ್ತೆ ಗುಂಪು ಘರ್ಷಣೆ ಭುಗಿಲೆದ್ದಿದೆ. ಉಖ್ರುಲ್ ಜಿಲ್ಲೆಯ ಲಿಟನ್ ಸರೈಖಾಂಗ್‌ನಲ್ಲಿ ಕುಕಿ ಸಮುದಾಯದ ಗುಂಪೊಂದು ತಂಗ್ಖುಲ್ ನಾಗಾ ಸಮುದಾಯದ ಸದಸ್ಯರ ಮೇಲೆ ದಾಳಿ ನಡೆಸಿ ಹಲವಾರು ಮನೆಗಳಿಗೆ ಬೆಂಕಿ ಹೆಚ್ಚಿದೆ. ಇದರಿಂದ ಈ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದೆ. ಲಿಟನ್ ಗ್ರಾಮದಲ್ಲಿ ಎರಡು ಬುಡಕಟ್ಟು ಗುಂಪುಗಳ ಮಧ್ಯೆ ತೀವ್ರವಾದ ಕಲ್ಲು ತೂರಾಟ ನಡೆದಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಸ್ಥಳೀಯ ಆಡಳಿತವು ಈ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿತು.
ಕುಕಿ ಸಮುದಾಯದ ಹಲವು ದುಷ್ಕರ್ಮಿಗಳು ಸೋಮವಾರ ಮಧ್ಯರಾತ್ರಿ ವೇಳೆಗೆ ಮಣಿಪುರದ ಅತಿದೊಡ್ಡ ನಾಗಾ ಬುಡಕಟ್ಟು ಎಂದು ಗುರುತಿಸಲ್ಪಟ್ಟಿರುವ ತಂಗ್ಖುಲ್ ನಾಗಾ ಸಮುದಾಯದ ಸದಸ್ಯರ ಹಲವಾರು ಮನೆಗಳಿಗೆ ಬೆಂಕಿ ಹಚ್ಚಿದ್ದರು. ಹತ್ತಿರದ ಪ್ರದೇಶದಲ್ಲಿ ಕುಕಿ ಸಮುದಾಯಕ್ಕೆ ಸೇರಿದವರ ಕೆಲವು ಮನೆಗಳಿಗೆ ಬೆಂಕಿ ಹಚ್ಚಲಾಗಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಅಧಿಕಾರಿಯೊಬ್ಬರು, ಈ ದಾಳಿಯಿಂದ ಎಷ್ಟು ಹಾನಿಯಾಗಿದೆ ಎಂಬುದು ತಿಳಿದು ಬಂದಿಲ್ಲ. ಹಾನಿಯನ್ನು ಖಚಿತಪಡಿಸಲಾಗುತ್ತಿದೆ ಮತ್ತು ಪರಿಸ್ಥಿತಿ ಉದ್ವಿಗ್ನವಾಗಿದೆ. ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದ್ದು, ವಿಡಿಯೊ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ. ಕೆಲವು ದೃಶ್ಯಗಳಲ್ಲಿ ಶಸ್ತ್ರಸಜ್ಜಿತ ಗುಂಪೊಂದು ಗ್ರಾಮದಲ್ಲಿ ಮನೆ ಮತ್ತು ವಾಹನಗಳಿಗೆ ಬೆಂಕಿ ಹಚ್ಚುವುದನ್ನು ಕಾಣಬಹುದು ಎಂದು ತಿಳಿಸಿದರು.

ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತ್ತು ಅನುಮಾನಾಸ್ಪದ ವ್ಯಕ್ತಿಗಳ ಚಲನವಲನದ ಮೇಲೆ ನಿಗಾ ಇರಿಸಲು ಮಹಾದೇವ್, ಲಂಬುಯಿ, ಶಾಂಗ್‌ಕೈ ಮತ್ತು ಇತರ ಪ್ರದೇಶಗಳಲ್ಲಿ ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಲಿಟನ್ ಸರೈಖಾಂಗ್ ಗ್ರಾಮದಲ್ಲಿ ಘರ್ಷಣೆ ನಡೆಸಿದ ಎರಡು ಬುಡಕಟ್ಟು ಗುಂಪುಗಳನ್ನು ಚದುರಿಸಲು ಭದ್ರತಾ ಪಡೆಗಳು ಅಶ್ರುವಾಯು ಶೆಲ್‌ಗಳನ್ನು ಹಾರಿಸಿವೆ ಎಂದು ಅವರು ತಿಳಿಸಿದರು.

ತಂಗ್‌ಖುಲ್ ನಾಗಾ ಮತ್ತು ಕುಕಿ ಸಮುದಾಯಗಳ ಗುಂಪಿನ ನಡುವೆ ಉಂಟಾಗಿರುವ ಉದ್ವಿಗ್ನತೆಯಿಂದಾಗಿ ಗ್ರಾಮದಲ್ಲಿ ಮತ್ತೆ ಶಾಂತಿ ಸುವ್ಯವಸ್ಥೆಗೆ ಭಂಗವಾಗುವ ಆತಂಕವಿದೆ. ಭಾನುವಾರ ಸಂಜೆ 7 ಗಂಟೆಯಿಂದ ಮುಂದಿನ ಆದೇಶದವರೆಗೆ ಯಾರೂ ಕೂಡ ನಿವಾಸದ ಹೊರಗೆ ಓಡಾಡುವುದನ್ನು ನಿಷೇಧಿಸಲಾಗಿದೆ. ಈ ಆದೇಶವು ಸರ್ಕಾರಿ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿಗೆ ಅನ್ವಯಿಸುವುದಿಲ್ಲ ಎಂದು ಉಖ್ರುಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಶಿಶ್ ದಾಸ್ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!