ಉದಯವಾಹಿನಿ, ಬೆಂಗಳೂರು: ಶಕ್ತಿಸೌಧ ವಿಧಾನಸೌಧದಲ್ಲಿರುವ ನಗರಾಭಿವೃದ್ಧಿ ಸಚಿವ ಸುರೇಶ್‌ ಅವರ ಕಚೇರಿಯಲ್ಲೇ ಕಳ್ಳತನ ನಡೆದ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಹೌದು. ಕೆಲಸದ ನಿಮಿತ್ತ ಸಚಿವರ ಕಚೇರಿಗೆ ನವೀನ್ ಎಂಬವರು ಚಿನ್ನಾಭರಣ ಹಾಗೂ ನಗದು ಇದ್ದ ಕೈ ಚೀಲದೊಂದಿಗೆ ಬಂದಿದ್ದರು. ಕೆಲಸ ಮುಗಿಸಿದ ತೆರಳುವಾಗ ಕೈ ಚೀಲವನ್ನು ಮರೆತು ಹೋಗಿದ್ದರು.

ಮಾರನೇ ದಿನ ಬಂದು ನೋಡಿದಾಗ ಕೈ ಚೀಲ ನಾಪತ್ತೆಯಾಗಿತ್ತು. 300 ಗ್ರಾಂ ಚಿನ್ನಾಭರಣ , 1.5 ಲಕ್ಷ ರೂ. ಕ್ಯಾಶ್ ಇದ್ದ ಕೈ ಚೀಲ ಕಳ್ಳತನವಾದ ಬೆನ್ನಲ್ಲೇ ಗಾಬರಿಗೊಂಡ ನವೀನ್ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸಚಿವರ ಕಚೇರಿಯಲ್ಲೇ ಕಳ್ಳತನ ನಡೆದ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿದ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ವಿಧಾನಸೌಧದ ಆಡಳಿತಾತ್ಮಕ ಮತ್ತು ಭದ್ರತಾ ವಿಷಯಗಳಿಗೆ ಸಂಬಂಧಿಸಿದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಗಳ ಇಲಾಖೆಯ (DPAR) ಡಿ ಗ್ರೂಪ್ ನೌಕರನ ಪಾತ್ರ ಗೊತ್ತಾಗಿದೆ.

ನೌಕರ ಕೈ ಚೀಲ ಹಿಡಿದುಕೊಂಡು ಹೋಗುವುದು ಸಿಸಿಟಿವಿಯಲ್ಲಿ ಪತ್ತೆಯಾದ ಬೆನ್ನಲ್ಲೇ ವಿಧಾನಸೌಧ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!