ಉದಯವಾಹಿನಿ, ನವದೆಹಲಿ: ಕೇಂದ್ರ ಸರ್ಕಾರದ ಕಾರ್ಮಿಕ, ರೈತ ಮತ್ತು ‘ಕಾರ್ಪೊರೇಟ್ ಪರ’ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆಗೆ ಸೇರಿದ ನೌಕರರು ಮತ್ತು ಕಾರ್ಮಿಕರು ಇಂದು ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಇದರಿಂದಾಗಿ ಹಲವು ರಾಜ್ಯಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತವಾಗಿದೆ.ಹೊಸ ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಲಾಗಿದ್ದು, ಇದಕ್ಕಾಗಿ 30 ಕೋಟಿ ಕಾರ್ಮಿಕರನ್ನು ಸಜ್ಜುಗೊಳಿಸಲಾಗಿದೆ ಎಂದು ಕಾರ್ಮಿಕ ಸಂಘಗಳ ಜಂಟಿ ವೇದಿಕೆ ಈಗಾಗಲೇ ತಿಳಿಸಿದೆ.

ಈ ಕುರಿತು ಮಾತನಾಡಿರುವ ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮರ್‌ಜೀತ್ ಕೌರ್, ದೇಶಾದ್ಯಂತ ಸಾರ್ವತ್ರಿಕ ಮುಷ್ಕರ ಕರೆ ನೀಡಲಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಹೇಳಿದರು.
ಅಸ್ಸಾಂ, ತಮಿಳುನಾಡು, ಪಾಂಡಿಚೇರಿ, ಕೇರಳ, ಒಡಿಶಾ ಮತ್ತು ಬಿಹಾರ ಸೇರಿದಂತೆ ಹಲವು ರಾಜ್ಯಗಳಲ್ಲಿ ಬಂದ್​ಗೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಅಂಗಡಿ-ಮುಂಗಟ್ಟುಗಳು ಬಂದ್​ ಆಗಿದ್ದವು. ಸಂಚಾರ ವ್ಯವಸ್ಥೆ ಮೇಲೆ ಬಂದ್ ಪರಿಣಾಮ ಬೀರಿದೆ.ಭಾರತೀಯ ಕಾರ್ಮಿಕ ಸಂಘಗಳ ಒಕ್ಕೂಟ (ಸಿಐಟಿಯು), ಅಖಿಲ ಭಾರತ ಕಾರ್ಮಿಕ ಸಂಘಗಳ ಕಾಂಗ್ರೆಸ್ (ಎಐಟಿಯುಸಿ), ಭಾರತೀಯ ರಾಷ್ಟ್ರೀಯ ಕಾರ್ಮಿಕ ಸಂಘಗಳ ಕಾಂಗ್ರೆಸ್ (ಐಎನ್‌ಟಿಯುಸಿ), ಹಿಂದ್ ಮಜ್ದೂರ್ ಸಭಾ (ಎಚ್‌ಎಂಎಸ್) ಮತ್ತು ಇತರ ಹಲವಾರು ಪ್ರಮುಖ ಕಾರ್ಮಿಕ ಸಂಘಗಳು ಜಂಟಿಯಾಗಿ ಬಂದ್​​ಗೆ ಕರೆ ಕೊಟ್ಟಿವೆ.

Leave a Reply

Your email address will not be published. Required fields are marked *

error: Content is protected !!