
ಉದಯವಾಹಿನಿ, ಕಾನ್ಪುರ(ಉತ್ತರ ಪ್ರದೇಶ): ಕಾನ್ಪುರದಲ್ಲಿ ಇತ್ತೀಚೆಗೆ ವಿಐಪಿ ರಸ್ತೆಯಲ್ಲಿ ಐಷಾರಾಮಿ ಲ್ಯಾಂಬೋರ್ಗಿನಿ ಕಾರು ಅಪಘಾತಗೊಂಡು ಹಲವಾರು ಜನರು ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತಂಬಾಕು ಉದ್ಯಮಿ ಕೆ.ಕೆ.ಮಿಶ್ರಾ ಅವರ ಪುತ್ರ ಶಿವಂ ಮಿಶ್ರಾ ಎಂಬಾತನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಶಿವಂ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಆಯುಕ್ತ ರಘುಬೀರ್ ಲಾಲ್ ತಿಳಿಸಿದರು.
10 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಇಟಾಲಿಯನ್ ಐಷಾರಾಮಿ ಸ್ಪೋರ್ಟ್ಸ್ ಕಾರು ಲ್ಯಾಂಬೋರ್ಗಿನಿ ರೆವೆಲ್ಟೊ, ಗ್ವಾಲ್ಟೋಲಿ ಪ್ರದೇಶದಲ್ಲಿ ಪಾದಚಾರಿಗಳು ಮತ್ತು ವಾಹನಗಳಿಗೆ ಡಿಕ್ಕಿ ಹೊಡೆದಿತ್ತು.
ಅಪಘಾತದಲ್ಲಿ ಗಾಯಗೊಂಡ ಇ-ರಿಕ್ಷಾ ಚಾಲಕ ಮೊಹಮ್ಮದ್ ತೌಫೀಕ್ (18) ಪೊಲೀಸರಿಗೆ ದೂರು ನೀಡಿದ್ದರು. ನಂತರ ಆರೋಪಿಗಳ ಪರ ವಕೀಲರು, ದೂರು ನೀಡಿರುವ ತೌಫೀಕ್ ಅವರು ಕಾನೂನು ಕ್ರಮ ಕೈಗೊಳ್ಳಲು ಆಸಕ್ತಿ ಹೊಂದಿಲ್ಲ ಎಂದು ಹೇಳಿದ್ದರು.
ಬುಧವಾರ ಪ್ರಕರಣ ಹೊಸ ತಿರುವು ಪಡೆದುಕೊಂಡಿತು. ಕಾರಿನ ನಿಯೋಜಿತ ಚಾಲಕ ಎಂದು ಹೇಳಿಕೊಳ್ಳುವ ಮೋಹನ್ ಎಂಬ ವ್ಯಕ್ತಿ, ಅಪಘಾತದ ಸಮಯದಲ್ಲಿ ಶಿವಂ ಮಿಶ್ರಾ ಅಲ್ಲ, ತಾನೇ ಕಾರು ಚಲಾಯಿಸುತ್ತಿದ್ದೆ ಎಂದು ಹೇಳಿದ್ದಾರೆ.
ಆದರೆ, ಪೊಲೀಸರು ಈ ಹೇಳಿಕೆಯನ್ನು ತಿರಸ್ಕರಿಸಿದ್ದು, ತನಿಖೆಯ ಸಮಯದಲ್ಲಿ ಸಂಗ್ರಹಿಸಲಾದ ಪುರಾವೆಗಳು ಶಿವಂ ಮಿಶ್ರಾ ಅವರೇ ಕಾರು ಚಾಲನೆ ಮಾಡುತ್ತಿದ್ದಾಗ ಪಾದಚಾರಿಗಳು ಮತ್ತು ಇತರ ವಾಹನಗಳಿಗೆ ಕಾರು ಡಿಕ್ಕಿ ಹೊಡೆದಿದೆ ಎಂದು ಸ್ಪಷ್ಟವಾಗಿ ದೃಢಪಡಿಸಿವೆ ಎಂದು ತಿಳಿಸಿದ್ದಾರೆ. ಅಪಘಾತದ ಸಂದರ್ಭದಲ್ಲಿ ಸ್ಥಳದಲ್ಲಿ ಜಮಾಯಿಸಿದ್ದ ಸ್ಥಳೀಯರು ಕಾರನ್ನು ಸುತ್ತುವರೆದು ಚಾಲಕ ಕಾರಿನಿಂದ ಇಳಿಯದಂತೆ ತಡೆದಿದ್ದರು. ಆರೋಪಿಗಳೊಂದಿಗೆ ಬಂದಿದ್ದ ಖಾಸಗಿ ಬೌನ್ಸರ್ಗಳು ಗುಂಪನ್ನು ಹಿಂದಕ್ಕೆ ತಳ್ಳಲು ಪ್ರಯತ್ನಿಸಿದ್ದು ಮಾತ್ರವಲ್ಲದೆ, ಆಕ್ರಮಣಕಾರಿಯಾಗಿ ವರ್ತಿಸಿದ್ದರು. ಇದು ಸ್ಥಳದಲ್ಲಿ ಉದ್ವಿಗ್ನತೆ ಹೆಚ್ಚಿಸಿತ್ತು ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ.
