ಉದಯವಾಹಿನಿ, ಶ್ರೀನಗರ(ಜಮ್ಮು ಮತ್ತು ಕಾಶ್ಮೀರ): ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಯನ್ನು ಇಸ್ರೇಲ್​ ಮತ್ತು ಅಮೆರಿಕದ ಪಡೆಗಳು ಜಂಟಿ ದಾಳಿ ನಡೆಸಿ ಹತ್ಯೆ ಮಾಡಿದ್ದು, ಇದರ ವಿರುದ್ಧ ಶ್ರೀನಗರ ನಗರ ಸೇರಿದಂತೆ ಕಾಶ್ಮೀರದ ಹಲವಾರು ಭಾಗಗಳಲ್ಲಿ ಭಾನುವಾರ ಪ್ರತಿಭಟನೆ ನಡೆದವು. ಕೇಂದ್ರಾಡಳಿತ ಪ್ರದೇಶದಲ್ಲಿ ಸಾವಿರಾರು ಜನರು ಒಟ್ಟುಗೂಡಿ ವ್ಯಾಪಕ ಪ್ರತಿಭಟನೆ ನಡೆಸುತ್ತಿರುವುದರಿಂದ ಅಲ್ಲಿನ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಶಾಂತವಾಗಿರಲು ಮನವಿ ಮಾಡಿದ್ದಾರೆ.

ಶಿಯಾ ಜನಸಂಖ್ಯೆ ಹೆಚ್ಚಿರುವ ಪ್ರದೇಶಗಳಲ್ಲಿ ಈ ಪ್ರತಿಭಟನೆಗಳು ನಡೆದವು. ಬೀದಿಗಳಲ್ಲಿ ಮೆರವಣಿಗೆ ನಡೆಸಿ ಅಮೆರಿಕ ಮತ್ತು ಇಸ್ರೇಲ್ ವಿರೋಧಿ ಘೋಷಣೆಗಳನ್ನು ಕೂಗಿದರು. ಲಾಲ್ ಚೌಕ್, ಸೈದಾ ಕಡಲ್, ಬುಡ್ಗಾಮ್, ಬಂಡಿಪೋರಾ, ಅನಂತನಾಗ್ ಮತ್ತು ಪುಲ್ವಾಮಾ ಪ್ರದೇಶಗಳಲ್ಲಿ ಪ್ರತಿಭಟನೆಗಳು ನಡೆದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾಳೆ ಬಂದ್​ಗೆ ಕರೆ: ಕಾಶ್ಮೀರದ ಧರ್ಮಗುರು ಮಿರ್ವೈಜ್ ಉಮರ್ ಫಾರೂಕ್ ತಮ್ಮ ಎಕ್ಸ್ ಖಾತೆಯಲ್ಲಿ ಖಮೇನಿ ಹತ್ಯೆಯನ್ನು ಖಂಡಿಸಿದ್ದಾರೆ. “ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಸೈಯದ್ ಅಲಿ ಖಮೇನಿ ಅವರನ್ನು ಅಮೆರಿಕ ಮತ್ತು ಇಸ್ರೇಲ್ ಕ್ರೂರವಾಗಿ ಹತ್ಯೆಗೈದಿರುವುದು ಬೆಚ್ಚಿಬೀಳಿಸಿದೆ. ಜಮ್ಮು ಮತ್ತು ಕಾಶ್ಮೀರದ ಜನರು ಈ ಕ್ರೌರ್ಯವನ್ನು ಖಂಡಿಸುತ್ತಾರೆ” ಎಂದು ಬರೆದುಕೊಂಡಿದ್ದಾರೆ.

ಧಾರ್ಮಿಕ ಸಂಘಟನೆಗಳ ಒಕ್ಕೂಟವಾದ ಮುತಾಹಿದಾ ಮಜ್ಲಿಸ್-ಎ-ಉಲಮಾ (MMU) ಸೋಮವಾರ ಸಂಪೂರ್ಣ ಬಂದ್​ಗೆ ಕರೆ ನೀಡಿದೆ. ಕಾಶ್ಮೀರ ಕಣಿವೆಯಲ್ಲಿ ಸುಮಾರು 15 ಲಕ್ಷ ಶಿಯಾಗಳಿದ್ದಾರೆ.
ಶಾಂತಿ ಕಾಪಾಡಿ-ಸಿಎಂ ಓಮರ್​ ಅಬ್ದುಲ್ಲಾ: ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳಲ್ಲಿ ಜನರು ಶಾಂತಿ ಕಾಪಾಡಲು ಜಮ್ಮು- ಕಾಶ್ಮೀರ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಭಾನುವಾರ ಮನವಿ ಮಾಡಿದರು.

ಇರಾನ್‌ನಲ್ಲಿರುವ ವಿದ್ಯಾರ್ಥಿಗಳು ಸೇರಿದಂತೆ ಜೆ-ಕೆ ನಿವಾಸಿಗಳ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಖಚಿತಪಡಿಸಿಕೊಳ್ಳಲು ತಮ್ಮ ಸರ್ಕಾರ ಕೇಂದ್ರ ವಿದೇಶಾಂಗ ಸಚಿವಾಲಯದೊಂದಿಗೆ ನಿಕಟ ಸಮನ್ವಯದಲ್ಲಿದೆ ಎಂದು ಅವರು ತಿಳಿಸಿದರು.

“ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆ, ಇರಾನ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರು ಓಮರ್​, ಎಲ್ಲಾ ಸಮುದಾಯಗಳು ಶಾಂತವಾಗಿರಬೇಕು. ಉದ್ವಿಗ್ನತೆ ಅಥವಾ ಅಶಾಂತಿಗೆ ಕಾರಣವಾಗುವ ಯಾವುದೇ ಕ್ರಮಗಳನ್ನು ತಪ್ಪಿಸಬೇಕು ಎಂದು ಮುಖ್ಯಮಂತ್ರಿ ಕಚೇರಿ ಎಕ್ಸ್​ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದೆ. ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ನಡೆಸಿದ ದಾಳಿಯಲ್ಲಿ ಖಮೇನಿ ಸಾವನ್ನಪ್ಪಿದ್ದಾರೆ ಎಂದು ಇರಾನ್​ನ ಸರ್ಕಾರಿ ಮಾಧ್ಯಮ ಭಾನುವಾರ ಮುಂಜಾನೆ ದೃಢಪಡಿಸಿದೆ.

Leave a Reply

Your email address will not be published. Required fields are marked *

error: Content is protected !!