ಉದಯವಾಹಿನಿ, ಪಶ್ಚಿಮ ಏಷ್ಯಾದ ಯುದ್ಧ ಪರಿಣಾಮವಾಗಿ ಉಂಟಾದ ಇಂಧನ ಕೊರತೆಯಿಂದ ಶ್ರೀಲಂಕಾ ಕಠಿಣ ಕ್ರಮಗಳಿಗೆ ಮುಂದಾಗಿದೆ. ತೈಲ ಸರಬರಾಜಿಗೆ ಪ್ರಮುಖವಾದ ಹಾರ್ಮುಜ್ ಜಲಸಂಧಿ ಬಂದ್ ಆಗಿರುವ ಹಿನ್ನೆಲೆ, ದೇಶದಲ್ಲಿ ವಾರಕ್ಕೆ ನಾಲ್ಕು ದಿನ ಮಾತ್ರ ಕೆಲಸದ ವ್ಯವಸ್ಥೆ ಜಾರಿಗೆ ತಂದಿದೆ.
ಈ ಹೊಸ ನಿಯಮಗಳು ಸರ್ಕಾರಿ ಕಚೇರಿಗಳ ಜೊತೆಗೆ ಶಾಲೆ ಮತ್ತು ವಿಶ್ವವಿದ್ಯಾಲಯಗಳಿಗೂ ಅನ್ವಯವಾಗಲಿದ್ದು, ಪ್ರತಿ ಬುಧವಾರ ರಜಾದಿನವಾಗಿ ಘೋಷಿಸಲಾಗಿದೆ. ಖಾಸಗಿ ಸಂಸ್ಥೆಗಳಿಗೂ ಇದೇ ಮಾದರಿ ಅನುಸರಿಸಲು ಮನವಿ ಮಾಡಲಾಗಿದೆ.
ಇದಕ್ಕೂ ಮುನ್ನ ಆರ್ಥಿಕ ಸಂಕಷ್ಟದಿಂದ ಚೇತರಿಸಿಕೊಳ್ಳುತ್ತಿರುವ ಲಂಕಾ, ಇಂಧನ ಬಳಕೆಯನ್ನು ಕಡಿಮೆ ಮಾಡಲು ತುರ್ತು ಕ್ರಮ ಕೈಗೊಂಡಿದೆ. ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮಾರ್ಚ್ 15ರಿಂದ ಖಾಸಗಿ ವಾಹನಗಳಿಗೆ ವಾರಕ್ಕೆ ಕೇವಲ 15 ಲೀಟರ್ ಇಂಧನ ಮಿತಿ ವಿಧಿಸಲಾಗಿದೆ. ಸಾರ್ವಜನಿಕ ಸಾರಿಗೆ ವಾಹನಗಳಿಗೆ ಮಾತ್ರ ಹೆಚ್ಚು ಪ್ರಮಾಣದಲ್ಲಿ ಇಂಧನ ಒದಗಿಸಲಾಗುತ್ತಿದೆ. ದೇಶದಲ್ಲಿನ ಇಂಧನ ಸಂಗ್ರಹವು ಸುಮಾರು ಆರು ವಾರಗಳವರೆಗೆ ಮಾತ್ರ ಸಾಕಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಸ್ಪತ್ರೆ ಮತ್ತು ತುರ್ತು ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಪ್ರಯಾಣ ಮತ್ತು ಇಂಧನ ಬಳಕೆಯನ್ನು ಕಡಿಮೆ ಮಾಡಲು ಸಾರ್ವಜನಿಕ ಕಾರ್ಯಕ್ರಮಗಳನ್ನೂ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!