ಉದಯವಾಹಿನಿ, ಕೊಲಂಬೋ: ಸಂಕಷ್ಟದ ಸಮಯದಲ್ಲಿ ಭಾರತ ಇಂಧನ ಪೂರೈಕೆ ಮಾಡಿದ್ದಕ್ಕೆ ಶ್ರೀಲಂಕಾ ಅಧ್ಯಕ್ಷ ದಿಸಾನಾಯಕೆ ಭಾರತಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಅವರು, ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಶ್ರೀಲಂಕಾ ಎದುರಿಸುತ್ತಿರುವ ಇಂಧನ ಪೂರೈಕೆಯಲ್ಲಿನ ಅಡಚಣೆಗಳ ಕುರಿತು ಕೆಲವು ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಮಾತನಾಡಿದ್ದೆ. ಭಾರತ ಕೂಡಲೇ ಸ್ಪಂದಿಸಿ ಸಹಕಾರ ನೀಡಿದ್ದಕ್ಕೆ ಕೃತಜ್ಞತೆಗಳು. ನಿನ್ನೆ ಕೊಲಂಬೊಗೆ 38,000 ಮೆಟ್ರಿಕ್ ಟನ್ ಇಂಧನ ಬಂದಿದೆ. ಸಹಕಾರ ನೀಡಿದ ವಿದೇಶಾಂಗ ಸಚಿವ ಜೈಶಂಕರ್ ಅವರಿಗೂ ಧನ್ಯವಾದಗಳು ಎಂದು ತಿಳಿಸಿದ್ದಾರೆ.
ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದಿಂದ ಉಂಟಾದ ಇಂಧನ ಬಿಕ್ಕಟ್ಟಿನ ಕುರಿತು ಶ್ರೀಲಂಕಾ ಅಧ್ಯಕ್ಷರು ಮಾ.24 ರಂದು ಪ್ರಧಾನಿ ನರೇಂದ್ರ ಮೋದಿಗೆ ಕರೆ ಮಾಡಿ ಮಾತನಾಡಿದ್ದರು.ಶ್ರೀಲಂಕಾ ಪಶ್ಚಿಮ ಏಷ್ಯಾ ಮತ್ತು ಸಿಂಗಾಪುರದಿಂದ ಇಂಧನವನ್ನು ಆಮದು ಮಾಡಿಕೊಳ್ಳುತ್ತಿತ್ತು. ಹಾರ್ಮುಜ್ ಜಲಸಂಧಿಯನ್ನು ಇರಾನ್ ಬಂದ್ ಮಾಡಿದ್ದು ವಿಶ್ವಾದ್ಯಂತ ತೈಲ ಬಿಕ್ಕಟ್ಟು ಎದುರಾಗಿದೆ. ಭಾರತ ತನ್ನ ಸ್ನೇಹಿತ ರಾಷ್ಟ್ರ ಎಂದು ಪರಿಗಣಿಸಿದ ಇರಾನ್ ಈಗ ಭಾರತದ ಹಡಗುಗಳ ಸಂಚಾರಕ್ಕೆ ಅನುಮತಿ ನೀಡಿದೆ.
