ಉದಯವಾಹಿನಿ, ರಾಯಪುರ: ಮನೆಗಳಲ್ಲಿ ಪ್ರಾರ್ಥನಾ ಸಭೆ ನಡೆಸಲು ಯಾವುದೇ ನಿಷೇಧವಿಲ್ಲ. ಜೊತೆಗೆ ಅಂತಹ ಸಭೆಗಳಿಗಾಗಿ ಸರ್ಕಾರಿ ಅಧಿಕಾರಿಗಳಿಂದ ಯಾವುದೇ ಪೂರ್ವಾನುಮತಿ ಅಗತ್ಯವಿಲ್ಲ ಎಂದು ಛತ್ತೀಸ್ಗಢ ಹೈಕೋರ್ಟ್ ಆದೇಶಿಸಿದೆ.
ಯಾವುದೇ ಕಾನೂನನ್ನು ಉಲ್ಲಂಘಿಸದೇ ಪ್ರಾರ್ಥನಾ ಸಭೆ ನಡೆಸಿದರೆ, ಯಾವುದೇ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ದೃಷ್ಠಿಯಲ್ಲಿಟ್ಟುಕೊಂಡು ನಾಗರಿಕರು ತಮ್ಮ ಖಾಸಗಿ ಸ್ಥಳಗಳಲ್ಲಿ ಧಾರ್ಮಿಕ ಆಚರಣೆಗಳನ್ನು ಮಾಡುವ ಹಕ್ಕನ್ನು ಹೊಂದಿದ್ದಾರೆ. ಇದು ಭಾರತೀಯ ಸಂವಿಧಾನದಿಂದ ಖಾತರಿಪಡಿಸಲಾದ ಹಕ್ಕು. ಮನೆಯಲ್ಲಿ ಪ್ರಾರ್ಥನಾ ಸೇವೆ ನಡೆಸುವುದನ್ನು ಆಕ್ಷೇಪಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ಸಂವಿಧಾನ ಸ್ವಾತಂತ್ರ್ಯದ ಹಕ್ಕನ್ನು ಖಾತರಿಪಡಿಸುತ್ತದೆ. ಈ ಹಕ್ಕು ವ್ಯಕ್ತಿ ತಮ್ಮ ಆಯ್ಕೆಯ ಧರ್ಮವನ್ನು ಆಚರಿಸಲು ಅನುವು ಮಾಡಿಕೊಡುತ್ತದೆ. ಸಾರ್ವಜನಿಕ ಶಾಂತಿಗೆ ಭಂಗವಾಗದಂತೆ ಖಾಸಗಿ ಸ್ಥಳಗಳಲ್ಲಿ ಧಾರ್ಮಿಕ ಕೂಟಗಳನ್ನು ನಡೆಸಬಹುದು ಎಂದು ಕೋರ್ಟ್ ತಿಳಿಸಿದೆ.
