ಉದಯವಾಹಿನಿ, ಲಕ್ನೋ: ಮಹಿಳಾ ಮೀಸಲಾತಿ ಮಸೂದೆಗೆ ಸೋಲಾಗಿದ್ದು, ದ್ರೌಪದಿ ವಸ್ತ್ರಾಪಹರಣಕ್ಕೆ ಸಮ ಎಂದು ಸಿಎಂ ಯೋಗಿ ಆದಿತ್ಯನಾಥ್ ವಿಪಕ್ಷಗಳ ವಿರುದ್ಧ ಕಿಡಿಕಾರಿದ್ದಾರೆ.
ಸಂಸತ್ತಿನಲ್ಲಿ 131ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯ ಚರ್ಚೆಯ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕರ ನಡವಳಿಕೆಯನ್ನು ಮಹಾಭಾರತದಲ್ಲಿ ದ್ರೌಪದಿಯ ವಸ್ತ್ರಾಪಹರಣಕ್ಕೆ ಹೋಲಿಸಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತನಾಡಿದ್ದಾರೆ. ಕ್ಷೇತ್ರಗಳ ಪುನರ್ವಿಂಗಡಣೆಯ ನಂತರ ಮಹಿಳಾ ಕೋಟಾವನ್ನು ಜಾರಿಗೆ ತರಲು ಪ್ರಯತ್ನಿಸುವ ಮಸೂದೆಗೆ ಇಂಡಿಯಾ ಒಕ್ಕೂಟ ವಿರೋಧ ವ್ಯಕ್ತಪಡಿಸಿತು. ಲೋಕಸಭೆಯಲ್ಲಿ ಮಸೂದೆಗೆ ಸೋಲಾಗಿದ್ದಕ್ಕೆ ಸಮಾಜವಾದಿ ಪಕ್ಷ ಸೇರಿದಂತೆ ಇಂಡಿಯಾ ಒಕ್ಕೂಟದ ನಡೆಗೆ ಯೋಗಿ ಆದಿತ್ಯನಾಥ್ ಅಸಮಾಧಾನ ಹೊರಹಾಕಿದ್ದಾರೆ.
ಸಂಸತ್ನಲ್ಲಿ ಕಾಂಗ್ರೆಸ್, ಎಸ್ಪಿ, ಟಿಎಂಸಿ ಮತ್ತು ಡಿಎಂಕೆ ವರ್ತಿಸಿದ ರೀತಿಯು ದ್ರೌಪದಿಯ ವಸ್ತ್ರಾಪಹರಣ ದೃಶ್ಯದಂತಿತ್ತು. ವಿರೋಧ ಪಕ್ಷದ ನಾಯಕರು ಮಾಡಿದ ಬೇಜವಾಬ್ದಾರಿ ಹೇಳಿಕೆಗಳು, ಅವರು ಪ್ರದರ್ಶಿಸಿದ ನಡವಳಿಕೆ ಎಲ್ಲರಿಗೂ ತಿಳಿದಿದೆ ಎಂದು ಸಿಎಂ ಕೆಂಡಕಾರಿದ್ದಾರೆ. ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಮೀಸಲಾತಿ ಬೇಡಿಕೆಯ ಬಗ್ಗೆ ಸಮಾಜವಾದಿ ಪಕ್ಷದ (SP) ನಿಲುವಿನ ಬಗ್ಗೆ ಮಾತನಾಡಿದ ಆದಿತ್ಯನಾಥ್, ಮಹಿಳಾ ಸಬಲೀಕರಣದ ಗುರಿಯನ್ನು ಹೊಂದಿರುವ ಶಾಸನದ ಬಗ್ಗೆ ಅಪ್ರಸ್ತುತ ವಿಷಯಗಳನ್ನು ಎತ್ತುವ ಪ್ರಯತ್ನಗಳು ನಡೆಯುತ್ತಿವೆ. ಅವರು ಸಂವಿಧಾನವನ್ನು ಪ್ರಾರ್ಥಿಸುತ್ತಾರೆ. ಆದರೆ, ಡಾ. ಬಿ.ಆರ್.ಅಂಬೇಡ್ಕರ್ ಅವರ ಮನೋಭಾವಕ್ಕೆ ವಿರುದ್ಧವಾಗಿ ವರ್ತಿಸುತ್ತಾರೆ ಎಂದು ಕುಟುಕಿದ್ದಾರೆ
