ಉದಯವಾಹಿನಿ, ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಗೆ ನಾಳೆ ಮತದಾನ ನಡೆಯಲಿದ್ದು, ರಾಜ್ಯದ ಒಟ್ಟು 234 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಸರ್ಕಾರ ರಚನೆಗೆ ಕನಿಷ್ಠ 118 ಸ್ಥಾನಗಳು ಅಗತ್ಯವಿದ್ದು ತ್ರೀಕೋನ ಸ್ಪರ್ಧೆ ಏರ್ಪಟ್ಟಿದೆ.ಚುನಾವಣೆಯು ಡಿಎಂಕೆ ಮತ್ತು ಕಾಂಗ್ರೆಸ್ ನೇತೃತ್ವದ ಒಕ್ಕೂಟ ಮತ್ತು ಎಐಎಡಿಎಂಕೆ ಮತ್ತು ಬಿಜೆಪಿ (BJP) ನೇತೃತ್ವದ ಎನ್ಡಿಎ (NDA) ಒಕ್ಕೂಟದ ನಡುವೆ ನೇರ ಸ್ಪರ್ಧೆ ನಡೆಯಲಿದೆ. ಇದೇ ಮೊದಲ ಬಾರಿಗೆ ತಮಿಳು ಸೂಪರ್ ಸ್ಟಾರ್ ಟಿವಿಕೆ ಪಕ್ಷ ಕಟ್ಟಿ ಸ್ವತಂತ್ರವಾಗಿ ಸ್ಪರ್ಧಿಸಿ ಚುನಾವಣಾ ಕಣಕ್ಕೆ ಧುಮುಕಿದ್ದಾರೆ. 234 ವಿಧಾನಸಭಾ ಕ್ಷೇತ್ರಗಳಲ್ಲಿ 4,000ಕ್ಕೂ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮೇ 4ರಂದು ಪಂಚರಾಜ್ಯಗಳ ಫಲಿತಾಂಶ ಪ್ರಕಟವಾಗಲಿದೆ.
ರಾಜ್ಯದಲ್ಲಿ ಅಂದಾಜು 6.2 ಕೋಟಿ ಮತದಾರರು ಮತದಾನಕ್ಕೆ ಅರ್ಹರಾಗಿದ್ದಾರೆ. ಇವರಲ್ಲಿ ಸುಮಾರು 3.1 ಕೋಟಿ ಮಹಿಳಾ ಮತದಾರರು ಹಾಗೂ 3 ಕೋಟಿ ಪುರುಷ ಮತದಾರರು ಇದ್ದಾರೆ. ಒಟ್ಟು 88,000ಕ್ಕೂ ಹೆಚ್ಚು ಮತಗಟ್ಟೆಗಳು ಸ್ಥಾಪನೆಯಾಗಿದ್ದು, ಪ್ರತಿ ಮತಗಟ್ಟೆಯಲ್ಲಿ ಸರಾಸರಿ 800–900 ಮತದಾರರು ಮತ ಚಲಾಯಿಸಲಿದ್ದಾರೆ.ಪ್ರತಿ ಕ್ಷೇತ್ರದಲ್ಲಿ ಸರಾಸರಿ 12–15 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದು, ಕೆಲವು ಕ್ಷೇತ್ರಗಳಲ್ಲಿ ಇದು 20ಕ್ಕಿಂತ ಹೆಚ್ಚು ಮಂದಿ ಕಣದಲ್ಲಿದ್ದಾರೆ. ಭದ್ರತಾ ಮತ್ತು ಮೇಲ್ವಿಚಾರಣೆ ವ್ಯವಸ್ಥೆಗೆ ಸುಮಾರು 1.5 ಲಕ್ಷಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆಗೊಂಡಿದ್ದು, 20,000ಕ್ಕೂ ಹೆಚ್ಚು ಸಂವೇದನಾಶೀಲ ಮತಗಟ್ಟೆಗಳಲ್ಲಿ ಹೆಚ್ಚುವರಿ ಪೊಲೀಸ್ ಕಾವಲು ಏರ್ಪಡಿಸಲಾಗಿದೆ. ಸುಮಾರು 45,000 ಸಿಸಿಟಿವಿ ಕ್ಯಾಮೆರಾಗಳ ಮೂಲಕ ನಿಗಾವಹಿಸಲಾಗುತ್ತದೆ.
ಚುನಾವಣಾ ಕಣದಲ್ಲಿರುವ ಪ್ರಮುಖ ಪಕ್ಷಗಳು ಮತದಾರರನ್ನು ಸೆಳೆಯಲು ಭರಪೂರ ಕೊಡುಗೆಗಳನ್ನು ಘೋಷಿಸಿವೆ. ಆಡಳಿತಾರೂಢ ಡಿಎಂಕೆ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಮುಂದುವರಿಕೆ, ಶಿಕ್ಷಣ ಮತ್ತು ಆರೋಗ್ಯಕ್ಕೆ ಆದ್ಯತೆ ನೀಡುವ ಭರವಸೆ ನೀಡಿದೆ. ಮತ್ತೊಂದೆಡೆ ಎಐಎಡಿಎಂಕೆ ನೇರ ನಗದು ವರ್ಗಾವಣೆ, ಅಗತ್ಯ ವಸ್ತುಗಳ ಮೇಲಿನ ಸಬ್ಸಿಡಿ ಮತ್ತು ಕಾನೂನು ಸುವ್ಯವಸ್ಥೆಯ ಸುಧಾರಣೆಯ ವಾಗ್ದಾನ ಮಾಡಿದೆ. ಈ ನಡುವೆ, ಭ್ರಷ್ಟಾಚಾರ ಮುಕ್ತ ಆಡಳಿತ ಮತ್ತು ಯುವಜನತೆಗೆ ಉದ್ಯೋಗದ ಭರವಸೆಯೊಂದಿಗೆ ನಟ ವಿಜಯ್ ಕಣಕ್ಕಿಳಿದಿದ್ದು, ಅತಂತ್ರ ಅಥವಾ ಜಿದ್ದಾಜಿದ್ದಿನ ಪೈಪೋಟಿ ಇರುವ ಕ್ಷೇತ್ರಗಳಲ್ಲಿ ಇವರ ಮತ ಹಂಚಿಕೆ ನಿರ್ಣಾಯಕವಾಗುವ ಸಾಧ್ಯತೆಯಿದೆ.
