ಉದಯವಾಹಿನಿ, ತ್ರಿಶೂರ್(ಕೇರಳಂ): ಇಲ್ಲಿನ ಮುಂಡತಿಕ್ಕೋಡ್​​ನಲ್ಲಿರುವ ಪಟಾಕಿ ತಯಾರಿಕಾ ಘಟಕದಲ್ಲಿ ಇಂದು ಭಾರಿ ಪ್ರಮಾಣದ ಸ್ಫೋಟ ಸಂಭವಿಸಿದ್ದು, ಕನಿಷ್ಠ 13 ಜನರು ಸಾವನ್ನಪ್ಪಿದ್ದಾರೆ. ತ್ರಿಶೂರ್ ಪೂರಂ ಉತ್ಸವಕ್ಕೆ ಸಿದ್ಧತೆ ನಡೆಯುತ್ತಿದ್ದ ಸ್ಥಳದಲ್ಲಿ ದುರಂತ ನಡೆದಿದೆ.
ಕೇರಳಂ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳ ಪ್ರಕಾರ, 13 ಕಾರ್ಮಿಕರಿಗೆ ಶೇ.70ರಷ್ಟು ಸುಟ್ಟ ಗಾಯಗಳಾಗಿದ್ದು, ಅವರನ್ನು ತ್ರಿಶೂರ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.ರಕ್ಷಣಾ ಕಾರ್ಯಾಚರಣೆ ಕಷ್ಟಕರವಾಗಿದ್ದು, ದಟ್ಟ ಹೊಗೆಯಿಂದಾಗಿ ಅಗ್ನಿಶಾಮಕದಳ ಸಿಬ್ಬಂದಿಗೆ ಘಟಕ ಪ್ರವೇಶಿಸಲು ಸಾಧ್ಯವಾಗುತ್ತಿಲ್ಲ. ಕುಸಿದ ಗೋದಾಮಿನ ಅವಶೇಷಗಳ ಅಡಿಯಲ್ಲಿ ಇನ್ನೂ ಹಲವಾರು ಕಾರ್ಮಿಕರು ಸಿಲುಕಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಆ ಗೋದಾಮಿನಲ್ಲಿ ಉತ್ಸವದಲ್ಲಿ ಪಟಾಕಿ ಪ್ರದರ್ಶನಗಳಿಗಾಗಿ ಬೃಹತ್ ಪ್ರಮಾಣದ ಗನ್‌ಪೌಡರ್ ಸಂಗ್ರಹಿಸಿಡಲಾಗಿತ್ತು ಎಂದು ತಿಳಿದು ಬಂದಿದೆ. ಗಾಯಾಳುಗಳಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ನೆರವು ಒದಗಿಸುವಂತೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮುಖ್ಯ ಕಾರ್ಯದರ್ಶಿಯೊಂದಿಗೆ ಮಾತನಾಡಿರುವ ಸಿಎಂ, ಅಗತ್ಯವಿದ್ದರೆ, ತೀವ್ರ ಸುಟ್ಟ ಗಾಯಗಳಿಂದ ಬಳಲುತ್ತಿರುವವರಿಗೆ ಚಿಕಿತ್ಸೆ ನೀಡಲು ರಾಜ್ಯದ ಹೊರಗಿನ ತಜ್ಞ ವೈದ್ಯರ ಸೇವೆಗಳನ್ನು ಬಳಸಿಕೊಳ್ಳುವಂತೆ ಸೂಚಿಸಿರುವುದಾಗಿ ಮುಖ್ಯಮಂತ್ರಿ ಕಚೇರಿ (ಸಿಎಮ್‌ಒ) ಹೇಳಿಕೆಯಲ್ಲಿ ತಿಳಿಸಿದೆ.

ಪೊಲೀಸ್, ಅಗ್ನಿಶಾಮಕ, ಆರೋಗ್ಯ, ಕಂದಾಯ ಮತ್ತು ವಿಪತ್ತು ನಿರ್ವಹಣೆ ಸೇರಿದಂತೆ ಎಲ್ಲಾ ಇಲಾಖೆಗಳನ್ನು ರಕ್ಷಣಾ ಪ್ರಯತ್ನಗಳಿಗಾಗಿ ಸಮನ್ವಯಗೊಳಿಸಲಾಗಿದೆ ಮತ್ತು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ವಿಶೇಷ ಕಾರ್ಯವಿಧಾನವನ್ನು ಸ್ಥಾಪಿಸಲಾಗಿದೆ.

ಜೀವಹಾನಿಗೆ ಮುಖ್ಯಮಂತ್ರಿ ಕೂಡ ಸಂತಾಪ ಸೂಚಿಸಿದ್ದಾರೆ. ಬಿಕ್ಕಟ್ಟನ್ನು ನಿರ್ವಹಿಸಲು ಕೇರಳಂ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೆಚ್ಚುವರಿ 108 ಆಂಬ್ಯುಲೆನ್ಸ್‌ಗಳು ಸೇರಿದಂತೆ ವಿಶೇಷ ವೈದ್ಯಕೀಯ ಸೌಲಭ್ಯಗಳಿಗೆ ಆದೇಶಿಸಿದ್ದಾರೆ. ಸ್ಫೋಟದ ತೀವ್ರತೆಗೆ ಘಟಕ ಸಂಪೂರ್ಣವಾಗಿ ಛಿದ್ರಗೊಂಡಿದೆ.

ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. “ತ್ರಿಶೂರ್‌ನಲ್ಲಿರುವ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಅಪಘಾತದಿಂದ ಜೀವಹಾನಿಯಾದ ಸುದ್ದಿ ಕೇಳಿ ದುಃಖವಾಯಿತು. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ” ಎಂದು ಎಕ್ಸ್​ ಪೋಸ್ಟ್​ ಮಾಡಿದ್ದಾರೆ.
ಮೃತರ ಸಂಬಂಧಿಕರಿಗೆ ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಪ್ರಧಾನಿ ಘೋಷಿಸಿದ್ದಾರೆ. ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡಲಾಗುವುದು ಎಂದು ಪಿಎಂಒ ಪ್ರತ್ಯೇಕ ಪೋಸ್ಟ್‌ನಲ್ಲಿ ತಿಳಿಸಿದೆ.ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಘಟನೆಗೆ ದುಃಖ ವ್ಯಕ್ತಪಡಿಸಿದ್ದಾರೆ. ತಿರುವಂಬಾಡಿಯ ಪಟಾಕಿ ಪರವಾನಗಿದಾರ ಮುಂಡತ್ತಿಕೋಡ್ ಸತೀಶ್ ಅವರ ಪಟಾಕಿ ತಯಾರಿಕಾ ಘಟಕದಲ್ಲಿ ಈ ದುರಂತ ಸಂಭವಿಸಿದೆ.

 

Leave a Reply

Your email address will not be published. Required fields are marked *

error: Content is protected !!