ಉದಯವಾಹಿನಿ, ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ.
ಗಾಲ್ವಾನ್ ಕಣಿವೆಯಲ್ಲಿ ನಡೆದ ಹಿಂಸಾತ್ಮಕ ಘರ್ಷಣೆಯ ನಂತರ ಸುಮಾರು ಐದು ವರ್ಷಗಳ ಹಿಂದೆ ಸ್ಥಗಿತಗೊಳಿಸಲಾಗಿದ್ದ ಸೇವೆಗಳನ್ನು ಹಾಗೂ ಭಾರತ, ಚೀನಾ ಇತ್ತೀಚೆಗೆ ನೇರ ವಿಮಾನಯಾನವನ್ನು ಪುನರಾರಂಭಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೀರ್ಘಕಾಲದಿಂದ ಸ್ಥಗಿತಗೊಂಡಿದ್ದ ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಸಹ ಪುನಃ ಸ್ಥಾಪಿಸಲಾಗಿದೆ. ಹೊಸ ವೀಸಾ ನಿಯಮಗಳು ಚೀನಾ, ಹಾಂಗ್ ಕಾಂಗ್ ಮತ್ತು ಮಕಾವುಗಳಿಂದ ಬರುವ ಪ್ರಯಾಣಿಕರಿಗೆ ಅನ್ವಯಿಸುತ್ತವೆ. ಎರಡೂ ದೇಶಗಳ ನಡುವಿನ ಉದ್ವಿಗ್ನತೆಯಿಂದಾಗಿ ಕಳೆದ ಕೆಲವು ವರ್ಷಗಳಿಂದ ಸ್ಥಗಿತಗೊಂಡಿದ್ದ ಪ್ರವಾಸೋದ್ಯಮ, ವ್ಯಾಪಾರ ಮತ್ತು ಜನರ ನಡುವಿನ ಸಂಪರ್ಕವನ್ನು ಪುನರುಜ್ಜೀವನಗೊಳಿಸುವ ಪ್ರಯತ್ನದ ಭಾಗವಾಗಿ ಸರ್ಕಾರದ ಈ ನಿರ್ಧಾರ ತೆಗೆದುಕೊಂಡಿದೆ. ಸಾಮಾನ್ಯ ವೀಸಾ ಕಾರ್ಯವಿಧಾನಗಳನ್ನು ಪುನರಾರಂಭಿಸುತ್ತಿದ್ದರೂ ಕೂಡ ಭದ್ರತಾ ಕಾಳಜಿಯಿಂದಾಗಿ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ.
ಈ ನಿರ್ಧಾರವು ಎರಡೂ ದೇಶಗಳ ನಡುವಿನ ಆರ್ಥಿಕ ಮತ್ತು ಸಾಂಸ್ಕೃತಿಕ ಸಂಬಂಧಗಳನ್ನು ಬಲಪಡಿಸುತ್ತದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ವ್ಯಾಪಾರ ಸಮುದಾಯವೂ ಈ ಕ್ರಮವನ್ನು ಸ್ವಾಗತಿಸಿದೆ. ಪ್ರಸ್ತುತ, ಎರಡೂ ದೇಶಗಳು ತಮ್ಮ ಹಿಂದಿನ ಭಿನ್ನಾಭಿಪ್ರಾಯಗಳನ್ನು ಬಿಟ್ಟು ಕ್ರಮೇಣ ಸಹಕಾರದತ್ತ ಸಾಗುತ್ತಿವೆ. ಎರಡೂ ದೇಶಗಳ ನಡುವಿನ ಸಂಬಂಧ ನಿಧಾನವಾಗಿ ಸುಧಾರಿಸುತ್ತಿದೆ ಎನ್ನಲಾಗಿದೆ.
