ಉದಯವಾಹಿನಿ, ಬೆಂಗಳೂರು: ಜಯದೇವ ಹೃದಯರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ (ಎಸ್‌ಜೆಐಸಿಎಸ್ ಮತ್ತು ಆರ್) ಶುಕ್ರವಾರ ಪಶ್ಚಿಮ ಬೆಂಗಳೂರಿನ ಗೋವಿಂದರಾಜ ನಗರದಲ್ಲಿ 100 ಹಾಸಿಗೆಗಳ ಜಯದೇವ ಘಟಕವನ್ನು ಸ್ಥಾಪಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ)ದ ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ.ಎಲ್ಲರಿಗೂ ಕೈಗೆಟುಕುವ ದರದಲ್ಲಿ ಹೃದಯ ಆರೋಗ್ಯ ಸೇವೆಯನ್ನು ನೀಡಲು ಹಾಗೂ ಆಡಳಿತ ವಿಕೇಂದ್ರೀಕರಣ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಲಾಗಿದೆ. ಇದರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್‌ನಲ್ಲಿ ಮಾಡಿದ ಪ್ರಮುಖ ಭರವಸೆ ಈಡೇರಿಸಿದಂತಾಗಿದೆ.

ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ.ಬಿ.ದಿನೇಶ್ ಮತ್ತು ಜಿಬಿಎ ಮುಖ್ಯ ಆಯುಕ್ತ ಎನ್.ಮಹೇಶ್ವರ ರಾವ್, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ಆರ್.ಪಾಟೀಲ್, ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೋಶಿನ್, ಪಶ್ಚಿಮ ಮಹಾನಗರ ಪಾಲಿಕೆ ಆಯುಕ್ತ ಕೆ.ವಿ.ರಾಜೇಂದ್ರ ಸಮ್ಮುಖದಲ್ಲಿ ವಿಕಾಸಸೌಧದಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಯಿತು.

ಹೃದಯ ಆರೈಕೆ ಸೇವೆಯನ್ನು ಬೆಂಗಳೂರಿನ ಪಶ್ಚಿಮ ಭಾಗದ ಜನರಿಗೂ ಒದಗಿಸಲು ಇದೊಂದು ಉತ್ತಮ ಹೆಜ್ಜೆಯಾಗಿದೆ. ಗೋವಿಂದರಾಜನಗರದಲ್ಲಿರುವ ಜಿಬಿಎಯ ಅಸ್ತಿತ್ವದಲ್ಲಿರುವ ಮಲ್ಟಿಸ್ಪೆಷಾಲಿಟಿ ಕಟ್ಟಡದಲ್ಲಿ ಸ್ಥಾಪಿಸಲಾಗುವ ಹೊಸ ಘಟಕವು ವಿಜಯನಗರ, ರಾಜಾಜಿನಗರ, ಯಶವಂತಪುರ, ರಾಜರಾಜೇಶ್ವರಿನಗರ, ದಾಸರಹಳ್ಳಿ, ಪೀಣ್ಯ ಮತ್ತು ಬೆಂಗಳೂರು ಗ್ರಾಮಾಂತರ ನಿವಾಸಿಗಳಿಗೆ ಹಾಗೂ ರಾಮನಗರ, ಮಂಡ್ಯ, ತುಮಕೂರು ಮತ್ತು ಹಾಸನ ಜಿಲ್ಲೆಗಳ ರೋಗಿಗಳಿಗೆ ಅನುಕೂಲವಾಗಲಿದೆ ಎಂದು ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದರು.

ಕಲಬುರಗಿ ಮತ್ತು ಮೈಸೂರಿನಲ್ಲಿ ಈಗಾಗಲೇ ಪ್ರತ್ಯೇಕ ಘಟಕಗಳನ್ನು ಆರಂಭಿಸಲಾಗಿದೆ. ಜಯದೇವ ಮುಖ್ಯ ಆಸ್ಪತ್ರೆಯಲ್ಲಿ ರೋಗಿಗಳ ಕಡಿಮೆ ಮಾಡಲು ಈ ಘಟಕಗಳು ನೆರವಾಗಲಿವೆ. 100 ಹಾಸಿಗೆಗಳ ಘಟಕವನ್ನು ಸ್ಥಾಪಿಸಲು ರಾಜ್ಯ ಸರ್ಕಾರವು 15 ಕೋಟಿ ರೂ. ಮೀಸಲಿರಿಸಲಿದೆ. ಪಶ್ಚಿಮ ಮಹಾನಗರ ಪಾಲಿಕೆ ಮೂಲಕ ಹಣಕಾಸು ಒದಗಿಸಲು ಮತ್ತು ಸಿಎಸ್ಆರ್ ನಿಧಿಯ ಅಡಿಯಲ್ಲಿ ಕ್ಯಾಥ್‌ಲ್ಯಾಬ್ ಸೌಲಭ್ಯವನ್ನು ಸ್ಥಾಪಿಸಲು ನಾವು ಬದ್ಧರಾಗಿದ್ದೇವೆ ಎಂದು ಶಾಸಕ ಪ್ರಿಯಕೃಷ್ಣ ತಿಳಿಸಿದರು.

ಮುಂದಿನ ದಿನಗಳಲ್ಲಿ ಬೆಂಗಳೂರಿನಾದ್ಯಂತ ಜಯದೇವ ಜಾಲವನ್ನು ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಘೋಷಿಸಿದ ಡಾ.ಬಿ.ದಿನೇಶ್, ಬೆಂಗಳೂರಿನ ಮಧ್ಯ, ಉತ್ತರ ಮತ್ತು ಪೂರ್ವ ಭಾಗದಲ್ಲಿ ಜಯದೇವ ಘಟಕಗಳನ್ನು ಸ್ಥಾಪಿಸುವ ಯೋಜನೆ ಇದೆ. ಉತ್ತರ ಬೆಂಗಳೂರಿನ ಘಟಕಕ್ಕೆ ಈಗಾಗಲೇ ಸ್ಥಳವನ್ನು ಗುರುತಿಸಲಾಗಿದ್ದು, ಬ್ಯಾಟರಾಯನಪುರ ಶಾಸಕ ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರೊಂದಿಗೆ ಸಮಾಲೋಚಿಸಿ ಅಂತಿಮಗೊಳಿಸಲಾಗುವುದು ಎಂದರು.

Leave a Reply

Your email address will not be published. Required fields are marked *

error: Content is protected !!