ಉದಯವಾಹಿನಿ, ಬೆಂಗಳೂರು: ಸಿಲಿಕಾನ್ ಸಿಟಿಯ ) ಆಸ್ತಿ ಮಾಲೀಕರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ‘ನಮ್ಮ ಖಾತೆ ನಮ್ಮ ಹಕ್ಕು’ ಅಭಿಯಾನದ ಮೂಲಕ ಆಸ್ತಿ ದಾಖಲೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಬೃಹತ್ ಯೋಜನೆಗೆ ಚಾಲನೆ ನೀಡಿದೆ.
ಸದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಸಿಎಂ, ಬೆಂಗಳೂರು ಉಸ್ತುವಾರಿ ಸಚಿವ ಡಿಕೆ ಶಿವಕುಮಾರ್, ಬೆಂಗಳೂರು ನಗರದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಮಟ್ಟದ ನಾಗರಿಕ ಸ್ನೇಹಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಗರದಲ್ಲಿ ಒಟ್ಟು 23 ಲಕ್ಷ ಆಸ್ತಿಗಳಿದ್ದು, ಇವುಗಳ ದಾಖಲೆಗಳನ್ನು ಸಂಪೂರ್ಣವಾಗಿ ಡಿಜಿಟಲೀಕರಣಗೊಳಿಸಿ, ಪಾರದರ್ಶಕತೆ ತರಲು ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು. ಈ ಸುದ್ದಿಗೋಷ್ಠಿಯಲ್ಲಿ ಬಿಡಿಎ ಅಧ್ಯಕ್ಷ ಹ್ಯಾರಿಸ್, ಸಚಿವ ಕೆ.ಜೆ ಜಾರ್ಜ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹಾಗೂ ಆಡಳಿತಾಧಿಕಾರಿ ಮಹೇಶ್ವರ್ ರಾವ್ ಪಾಲ್ಗೊಂಡಿದ್ದರು.
ಸರ್ಕಾರವು ಇದನ್ನು ಆರನೇ ಗ್ಯಾರಂಟಿ ಎಂದು ಕರೆದಿದ್ದು, ಪ್ರತಿಯೊಬ್ಬ ಆಸ್ತಿ ಮಾಲೀಕರಿಗೆ ಅವರ ಹಕ್ಕಿನ ದಾಖಲೆಗಳನ್ನು ತಲುಪಿಸುವ ಗುರಿ ಹೊಂದಿದೆ. ಪ್ರತಿಯೊಂದು ಆಸ್ತಿಯನ್ನು ಜಿಪಿಎಸ್ ಮೂಲಕ ಮ್ಯಾಪಿಂಗ್ ಮಾಡಿ, ಸೈಟ್ ಲೊಕೇಶನ್ ಮತ್ತು ಮಾಲೀಕರ ಫೋಟೋ ಇರುವ ದಾಖಲೆಗಳನ್ನು ಸಿದ್ಧಪಡಿಸಲಾಗುತ್ತದೆ.
ನಕಲಿ ದಾಖಲೆ ಸೃಷ್ಟಿ ತಡೆಯಲು ಈಗಾಗಲೇ 7 ಸಾವಿರಕ್ಕೂ ಹೆಚ್ಚು ಪ್ರಮುಖ ದಾಖಲೆಗಳನ್ನು ಸ್ಕ್ಯಾನ್ ಮಾಡಲಾಗಿದೆ ಮೇ 16ರಿಂದ ಈ ಅಭಿಯಾನ ಆರಂಭವಾಗಲಿದ್ದು, ಅಧಿಕಾರಿಗಳು ಮತ್ತು ಗ್ಯಾರಂಟಿ ಯೋಜನೆಯ ಸದಸ್ಯರು ಮನೆ ಮನೆಗೆ ಭೇಟಿ ನೀಡಿ ಫೈಲ್ ತಲುಪಿಸಲಿದ್ದಾರೆ.
